06/08/2026
ಗಜೇಂದ್ರಗಡ: ಮನೆ ನಿರ್ಮಾಣ ಕಾಮಗಾರಿ ವಿಳಂಬ ಖಂಡಿಸಿ ಜಯಕರ್ನಾಟಕ ಜನಪರ ವೇದಿಕೆ ತಹಶೀಲ್ದಾರ್ ಅವರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಆತ್ಮೀಯರೆ,
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್.ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಹಾಲಪ್ಪವರವಿ ಅವರ ಸಹಕಾರದೊಂದಿಗೆ, ಗದಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಣ್ಣಯಲ್ಲಪ್ಪ ಒಳಗೇರಿ ಅವರ ನೇತೃತ್ವದಲ್ಲಿ,
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಗಜೇಂದ್ರಗಡ ತಾಲೂಕು ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ತಹಶಿಲ್ದಾರರ ಮೂಲಕ ಗದಗ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 2022–23ನೇ ಸಾಲಿನಲ್ಲಿ 300 ಮನೆಗಳ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಕಾಮಗಾರಿ ವಿಳಂಬ ನೀತಿ ಅನುಸರಿಸುತ್ತಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಫಲಾನುಭವಿಗಳಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿ, ಗುತ್ತಿಗೆದಾರರ ಬಳಿ ಕಾರ್ಮಿಕರ ಕೊರತೆ ಉಂಟಾದ ಕಾರಣ ಆರಂಭದಲ್ಲೇ ಮನೆಗಳ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಬಳಿಕ ಮಂಡಳಿಯ ಸಹಾಯಕ ಅಭಿಯಂತರರು ಹಾಗೂ ಗುತ್ತಿಗೆದಾರರು ಫಲಾನುಭವಿಗಳ ಸಭೆ ನಡೆಸಿ, "ಕಾರ್ಮಿಕರ ಕೊರತೆಯಿರುವುದರಿಂದ ನೀವೇ ಸ್ವಂತ ವೆಚ್ಚದಲ್ಲಿ ಮನೆ ನಿರ್ಮಿಸಿಕೊಳ್ಳಿ. ನಂತರ ಅನುದಾನದ ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುವುದು" ಎಂದು ಭರವಸೆ ನೀಡಿದ್ದರು.
ಅಧಿಕಾರಿಗಳ ಈ ಮಾತನ್ನು ನಂಬಿದ ಅನೇಕ ಫಲಾನುಭವಿಗಳು ಸಾಲ ಮಾಡಿ ಮನೆ ನಿರ್ಮಾಣ ಆರಂಭಿಸಿದರೂ, ಇಂದಿಗೂ ಅನುದಾನದ ಹಣ ಬಿಡುಗಡೆಯಾಗದೇ ಹಲವು ಮನೆಗಳು ಅರ್ಧಕ್ಕೆ ನಿಂತಿದ್ದು, ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ, ಈಗಾಗಲೇ ಸಂಪೂರ್ಣ ಮನೆ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಬಾಕಿ ಇರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅಲ್ಲದೆ, ಗುತ್ತಿಗೆದಾರರಿಗೆ ಬಿಲ್ ಪಾವತಿಸುವ ಮೊದಲು ಕಾಮಗಾರಿಯ ಪರಿಶೀಲನೆ ನಡೆಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಪೂರ್ಣಗೊಂಡಿರುವ ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಗಜೇಂದ್ರಗಡ ತಾಲ್ಲೂಕು ಘಟಕದ ಕಳಕಪ್ಪ ಪೋತ, ಕಳಕಪ್ಪ ಹಾಳಕೇರಿ, ಎಸ್.ಎಸ್. ಬಂಡಾರಿ, ಎಂ.ಜಿ. ರಾಜೋಳಿ, ಕೆ.ಐ. ಕೆಂಚಿ, ಸುಭಾಷ್ ಜಾದವ್, ನವೀನ್ ಪತ್ತಿ, ಮೊಹಮ್ಮದ್ ರಫಿ, ಮುದುಗಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.