30/08/2026
ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
ಮದ್ದೂರು ನಗರಸಭೆ ವ್ಯಾಪ್ತಿಯ ಗೊರವನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾಮಗಳಲ್ಲಿ ರಸ್ತೆ ಮತ್ತು ನಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಅಂದಾಜು ₹3.30 ಕೋಟಿ ವೆಚ್ಚದಲ್ಲಿ ಮುಖಂಡರೊಂದಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಮದ್ದೂರು ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಉಪ ಲೋಕಾಯುಕ್ತರು ಪರಿಶೀಲನೆ ನಡೆಸಿ, ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಸುಮೋಟೋ ಪ್ರಕರಣಗಳನ್ನು ದಾಖಲಿಸಿರುವುದು ಗಮನಕ್ಕೆ ಬಂದಿದೆ. ತಪ್ಪಿತಸ್ಥರು ಕಂಡುಬಂದಲ್ಲಿ ಕೇವಲ ಪ್ರಕರಣ ದಾಖಲಿಸುವುದಷ್ಟೇ ಅಲ್ಲದೆ, ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ನನ್ನ ಅಭಿಪ್ರಾಯ.
ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ತಮ್ಮ ಕಾರ್ಯವೈಖರಿಯನ್ನು ಬದಲಿಸಿಕೊಂಡರೆ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವುದಿಲ್ಲ. ಕೆಲವೊಮ್ಮೆ ಸಾರ್ವಜನಿಕರೂ ತಮ್ಮ ತುರ್ತು ಕೆಲಸಗಳನ್ನು ಶೀಘ್ರವಾಗಿ ಮಾಡಿಸಿಕೊಳ್ಳುವ ಉದ್ದೇಶದಿಂದ ಲಂಚದ ಆಮಿಷ ನೀಡುತ್ತಿರುವುದು ಕಂಡುಬರುತ್ತದೆ.
ಆದ್ದರಿಂದ ಸಾರ್ವಜನಿಕರು ಕೂಡ ಯಾವುದೇ ಕೆಲಸಕ್ಕಾಗಿ ಲಂಚ ನೀಡದೆ, ತಮ್ಮ ಹಕ್ಕಿನ ಕೆಲಸಗಳನ್ನು ನ್ಯಾಯಯುತವಾಗಿ ಪಡೆದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅಧಿಕಾರಿಗಳು ಲಂಚ ಸ್ವೀಕರಿಸದಿರುವುದು ಎಷ್ಟು ಮುಖ್ಯವೋ, ಸಾರ್ವಜನಿಕರು ಲಂಚ ನೀಡದಿರುವುದೂ ಅಷ್ಟೇ ಮುಖ್ಯ. ಈ ಮೂಲಕ ಮಾತ್ರ ಲಂಚಮುಕ್ತ ಹಾಗೂ ಪಾರದರ್ಶಕ ಆಡಳಿತ ವ್ಯವಸ್ಥೆಯನ್ನು ನಿರ್ಮಿಸಲು ಸಾಧ್ಯ.
ಲೋಕಾಯುಕ್ತ ಅಧಿಕಾರಿಗಳು ಕೆಲವು ಕಡೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಸೂಳೆಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಯಾವುದೇ ಕಳಪೆ ಕಾಮಗಾರಿ ನಡೆಯುತ್ತಿಲ್ಲ. ನಾನೂ ಸಹ ಆಗಾಗ್ಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ.
ಕೆರೆ ಏರಿ ನಿರ್ಮಾಣಕ್ಕೆ ಕೆರೆಯ ಮಣ್ಣನ್ನೇ ಬಳಸಲಾಗಿದೆ. ಸದ್ಯ ಮಳೆಗಾಲವಾಗಿರುವುದರಿಂದ ಅಲ್ಲಲ್ಲಿ ಕೆರೆಯ ಮಣ್ಣು ಸ್ವಲ್ಪ ಕುಸಿದಿರುವುದು ಕಂಡುಬಂದಿದೆ. ಆದರೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡ ನಂತರ ಗುಣಮಟ್ಟವನ್ನು ಯಾರೇ ಆಗಲಿ ಪರಿಶೀಲಿಸಬಹುದು.
ಸಚಿವ ನಾಗೇಂದ್ರ ಅವರು ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಉಂಟಾಗಬಾರದು ಎಂಬ ಉದ್ದೇಶದಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೈತ್ರಿ ಪಕ್ಷಗಳ ಹೋರಾಟಕ್ಕೆ ಮಣಿದು ಅವರು ರಾಜೀನಾಮೆ ನೀಡಿಲ್ಲ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಹೈಕಮಾಂಡ್ ಕೂಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿಲ್ಲ. ಅವರು ತಮ್ಮ ಸ್ವಇಚ್ಛೆಯಿಂದಲೇ ರಾಜೀನಾಮೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ. ಸಂದರ್ಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಹರೀಶ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ಮಮತಾ ಶಂಕರೇಗೌಡ, ಮುಖಂಡರಾದ ಮಧುಕುಮಾರ್, ರಾಘವ, ಪ್ರದೀಪ್, ಹಿತೇಶ್, ಮಹದೇವಯ್ಯ, ಮರಿದೇವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.