03/09/2026
ತುಂಗಭದ್ರಾ ಎಡದಂಡೆ ನಾಲೆಯ ಕೊನೆಯ ಭಾಗದ ರೈತರಿಗೆ ಸಮರ್ಪಕ ಹಾಗೂ ನ್ಯಾಯಯುತವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಹೀರಾ ನಸೀಮ್ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ನೀರು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಲುವೆಯಲ್ಲಿ ನೀರು ಪೋಲಾಗುವುದನ್ನು ತಡೆಗಟ್ಟುವುದು, ಅಕ್ರಮವಾಗಿ ನೀರು ಎತ್ತುವುದನ್ನು ನಿಯಂತ್ರಿಸುವುದು ಹಾಗೂ ಅಕ್ರಮ ಪೈಪ್ಲೈನ್ಗಳ ವಿರುದ್ಧ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಿರವಾರ ಹಾಗೂ ಮಸ್ಕಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸುವಂತೆ ಜೆಸ್ಕಾಂ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಹಾಗೂ ಹೆಚ್ಚುವರಿ ಸಿಬ್ಬಂದಿ ಒದಗಿಸುವುದಾಗಿ ತಿಳಿಸಿದರು. ಕಾಲುವೆಗಳ ಮೇಲೆ ನಿರಂತರವಾಗಿ ಮೇಲುಸ್ತುವಾರಿ ನಡೆಸಬೇಕು ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ಅವರು ತುಂಗಭದ್ರಾ ಎಡದಂಡೆ ನಾಲೆಯ ವ್ಯಾಪ್ತಿ, ಅಚ್ಚುಕಟ್ಟು ಪ್ರದೇಶ ಹಾಗೂ ಭತ್ತದ ಬೆಳೆಗೆ ಸಂಬಂಧಿಸಿದ ಮಾಹಿತಿಯನ್ನು ಸಭೆಗೆ ನೀಡಿದರು. ಅಚ್ಚುಕಟ್ಟು ಪ್ರದೇಶದಲ್ಲಿ ಅನುಮತಿಸಲಾದ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ, ನೀರಿನ ಸಮರ್ಪಕ ಬಳಕೆಗಾಗಿ ಪರ್ಯಾಯ ಬೆಳೆಗಳ ಕುರಿತು ರೈತರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕೊಪ್ಪಳ ಜಿಲ್ಲಾಧಿಕಾರಿ ಶ್ರೀ ಸುರೇಶ ಬಿ. ಇಟ್ನಾಳ ಅವರು ನೀರು ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳ ಪರಸ್ಪರ ನಿಯೋಜನೆ ಕುರಿತು ಸಲಹೆ ನೀಡಿದರು.
ಕೊನೆಯ ಭಾಗದ ರೈತರಿಗೆ ಸಮರ್ಪಕ ಹಾಗೂ ನ್ಯಾಯಯುತವಾಗಿ ನೀರು ತಲುಪುವಂತೆ ಎಲ್ಲಾ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.